ನವದೆಹಲಿ : ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಗೆಲುವು ಸಾಧಿಸಿದ್ದು, ಆಪ್ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮಾರ್ಚ್ 16 ರಂದು ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಾನ್ ಅವರು ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸಿದ್ದಾರೆ.
ಪ್ರಮಾಣ ವಚನಕ್ಕೂ ಮುನ್ನ ಮಾರ್ಚ್ 13 ರಂದು ಅಮೃತಸರದಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಭಗವಂತ್ ಮಾನ್ ಅವರು ರೋಡ್ ಶೋ ನಡೆಸಲಿದ್ದಾರೆ.
ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಮಾನ್, ಅರವಿಂದ್ ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಇದು ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಕೇಜ್ರಿವಾಲ್ ಜೊತೆಗಿನ ಮೊದಲ ಭೇಟಿಯಾಗಿದೆ. ಎಎಪಿ ಮುಖಂಡ ರಾಘವ್ ಚಾಧಾ ಕೂಡಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.