ನವದೆಹಲಿ : ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ, ಸಾಂಸ್ಥಿಕ ಚುನಾವಣೆ ಮತ್ತು ಸದ್ಯದ ರಾಜಕೀಯ ಪರಿಸ್ಥಿತಿ ಕುರಿತಂತೆ ಚರ್ಚಿಸಲು ಮಾರ್ಚ್ 26ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆಯನ್ನು ಕರೆದಿದ್ದಾರೆ.
ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿ ಸಚಿವರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಸೋನಿಯಾ ಗಾಂಧಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಪಕ್ಷದ ಸದಸ್ಯತ್ವ ನೋಂದಣಿ, ಮುಂದಿನ ಹೋರಾಟದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ.
ಇತ್ತೀಚಿಗೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲು ಹಾಗೂ ಸೋನಿಯಾ ಗಾಂಧಿ ಕೆಲ ಜಿ-23 ಮುಖಂಡರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಸಭೆ ನಡೆಸಲಾಗುತ್ತಿದೆ. ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಮನೀಷ್ ತಿವಾರಿ ಮತ್ತು ವಿವೇಕ್ ಟಾಂಕಾ ಸೇರಿದಂತೆ ಕೆಲವು ಅತೃಪ್ತ ಗುಂಪಿನ ಸದಸ್ಯರೊಂದಿಗೆ ಸೋನಿಯಾ ಗಾಂಧಿ ಸಮಾಲೋಚನೆ ನಡೆಸಿದ್ದರು.