ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗವು ಲಖಿಂಪುರ ಖೇರಿ ಘಟನೆ ಕುರಿತು ಸತ್ಯಾಂಶಗಳನ್ನುಳ್ಳ ಮನವಿ ಪತ್ರವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಿತು. ನಿಯೋಗದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕರಾದ ಎ.ಕೆ.ಆಂಟನಿ, ಗುಲಾಮ್ ನಬಿ ಅಜಾದ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು.
ರಾಷ್ಟ್ರಪತಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ’ಅ.3 ರಂದು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವರ ಪುತ್ರ ಆಶಿಷ್ ಆರೋಪಿಯಾಗಿದ್ದಾರೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಲು ಸಚಿವ ಅಜಯ್ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ರಾಷ್ಟ್ರಪತಿಯವರಿಗೆ ತಿಳಿಸಿದ್ದೇವೆ’ ಎಂದು ಹೇಳಿದರು.
’ಪ್ರಕರಣದ ತನಿಖೆ ನಿಷ್ಪಕ್ಷವಾಗಿ ನಡೆದು, ನ್ಯಾಯ ಸಿಗಬೇಕಾದರೆ, ಸುಪ್ರೀಂ ಕೋರ್ಟ್ನ ಇಬ್ಬರು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಕೊಲೆಯ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು’ ಎಂದು ಅವರು ಆಗ್ರಹಿಸಿದರು.
’ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೂ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹಾಗೆಯೇ ನ್ಯಾಯವೂ ಸಿಗುವುದಿಲ್ಲ. ಇದು ಕೇವಲ ಕೊಲೆಯಾದ ರೈತರ ಕುಟುಂಬಗಳ ಧ್ವನಿ ಮಾತ್ರವಲ್ಲ, ಎಲ್ಲ ರೈತರ ಧ್ವನಿಯಾಗಿದೆ. ಈ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವೂ ನಡೆಯುತ್ತಿದೆ’ ಎಂದು ಹೇಳಿದರು. ’ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸುವುದಾಗಿ ನಮಗೆ ಭರವಸೆ ನೀಡಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.