ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಗಣ್ಯಾತೀಗಣ್ಯರಿಗೆ ಟ್ರಸ್ಟ್ ಆಹ್ವಾನಗಳನ್ನು ನೀಡುತ್ತಿದೆ. ಇದೀಗ ಕಾಂಗ್ರೆಸ್ ನಾಯಕರಿಗೂ ಆಮಂತ್ರಣ ಪತ್ರಿಕೆ ನೀಡಿದ್ದು, ಅದಕ್ಕೆ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಹೆಚ್.ಡಿ ದೇವೇಗೌಡರಿಗೂ ಈಗಾಗಲೇ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಪಕ್ಷದ ನಾಯಕ ಅಧೀರ್ ರಂಜನ್ ಅವರು ಈ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ್ದಾರೆ.
ಈ ಸಂಬಂಧ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಪಕ್ಷದ ನಿಲುವು ಏನೆಂದು ನಿಮಗೆ ತಿಳಿಯಲಿದೆ. ನಾವು ಭಾಗವಹಿಸುತ್ತೇವೆಯೋ ಇಲ್ಲವೋ ಎಂಬುದು ಜನವರಿ 22 ರಂದು ನಿಮಗೆ ಗೊತ್ತಾಗಲಿದೆ. ಅವರು ನಮಗೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅವರ ಆಹ್ವಾನಕ್ಕೆ ನಾವೂ ಆಭಾರಿಯಾಗಿದ್ದೇವೆ, ಮುಂದೆ ಕಾದು ನೋಡೋಣ ಎಂದು ತಿಳಿಸಿದ್ದಾರೆ.