ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ತಯಾರಿ ಶುರು ಮಾಡಿದೆ. ಅದಕ್ಕಾಗಿ ಗುರುವಾರ (ಡಿ.21) ದೆಹಲಿಯ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದೆ.
ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತ ಮೈತ್ರಿಕೂಟದ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಚರ್ಚಿಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯ ತಿಳಿಸಿದ್ದಾರೆ.
ಇನ್ನು ಮಮತಾ ಬ್ಯಾನರ್ಜಿ ಅವರ ಮಾತಿಗೆ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲಿಸಿದ್ದಾರೆ. ಸಂಸದರ ಅಮಾನತು ವಿಚಾರ ಕೂಡ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ.ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಲ್ಲಿ ಇವಿಎಂ ಬಗ್ಗೆಯೂ ಚರ್ಚಿಸಲಾಗಿದೆ.