ದೆಹಲಿ: ಋತುಚಕ್ರವು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನೆಗೆ ಉತ್ತರಿಸಿದ ಅವರು ಎಲ್ಲಾ ಕೆಲಸದ ಸ್ಥಳಗಳಲ್ಲಿ ವೇತನ ಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವನೆಯೂ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದಿದ್ದಾರೆ.
10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರವು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಸ್ಮೃತಿ ಇರಾನಿ ಹೇಳಿದರು. ಈ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬೆಂಬಲಿಸುತ್ತದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ. ಮಿಷನ್ ಶಕ್ತಿಯ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದಿದ್ದಾರೆ.