ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ವಿರುದ್ಧ ಹರಿಹಾಯ್ದಿದ್ದಾರೆ. ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗವೇ ಭದ್ರತಾ ಲೋಪ ಸಂಭವಿಸಲು ಕಾರಣ ಎಂದು ದೂರಿದ್ದಾರೆ.
ಭಾರತೀಯರು ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ. ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಆಗಿದೆ. ಆದರೆ ಇದು ಏಕೆ ಆಯಿತು? ಅದಕ್ಕೆ ಮುಖ್ಯ ಕಾರಣ ನಿರುದ್ಯೋಗ. ಮೋದಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿಯವರ ನೀತಿಗಳಿಂದಾಗಿ ನಿರುದ್ಯೋಗ ಮತ್ತು ಹಣದುಬ್ಬರ ಸಮಸ್ಯೆ ತಲೆದೋರಿದೆ. ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಇವೇ ಮುಖ್ಯ ಕಾರಣ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಭದ್ರತಾ ಲೋಪ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಅವರು ಮಾಧ್ಯಮಗಳೊಂದಿಗೆ ಮಾತ್ರ ಮಾತನಾಡುತ್ತಾರೆ. ಆದರೆ ಸದನದಲ್ಲಿ ಈ ವಿಷಯದ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.