ನವದೆಹಲಿ: ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪ್ರಣೀತ್ ಕೌರ್ ಪಂಜಾಬ್ನ ಪಟಿಯಾಲಾ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದಾರೆ. ಕಳೆದ 25 ವರ್ಷಗಳಿಂದ ಪಟಿಯಾಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾರಣ ಬಿಜೆಪಿಯು ಅವರಿಗೆ ಪಟಿಯಾಲ ಕ್ಷೇತ್ರವನ್ನು ನೀಡಬಹುದು. ಇದರೊಂದಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಈ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವುದು 30 ವರ್ಷಗಳಲ್ಲಿ ಇದೇ ಮೊದಲು.
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಫೆಬ್ರವರಿ 3, 2023 ರಂದು ಪ್ರಣೀತ್ ಅವರನ್ನು ಅಮಾನತುಗೊಳಿಸಿತ್ತು.ಲೋಕಸಭೆ ಸದಸ್ಯತ್ವ ಕಳೆದುಕೊಳ್ಳಲು ಇಷ್ಟವಿಲ್ಲದ ಕಾರಣ ಪ್ರಣೀತ್ ಕೌರ್ ಪಕ್ಷಕ್ಕೆ ರಾಜೀನಾಮೆ ನೀಡಿರಲಿಲ್ಲ.
ಪ್ರಣೀತ್ ಅವರು ನಿರಂತರವಾಗಿ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು ಎಂಬ ಆರೋಪ ಪ್ರಣೀತ್ ವಿರುದ್ಧ ಕೇಳಿಬಂದಿದ್ದವು. ಅಷ್ಟೇ ಅಲ್ಲ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲೂ ಭಾಗವಹಿಸಿರಲಿಲ್ಲ.