ನವದೆಹಲಿ: ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಬಂಧನದ ವಿರುದ್ಧ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡರು ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ನೇತೃತ್ವದಲ್ಲಿ ಮಂಗಳವಾರ ರಾಜ್ ಘಾಟ್ನಲ್ಲಿ ಮೌನ ಪ್ರತಿಭಟನೆ ನಡೆಸಿದರು. ಮಹಾತ್ಮಾ ಗಾಂಧಿ ಸಮಾಧಿ ಬಳಿ ನಡೆದ ಪ್ರತಿಭಟನೆಯಲ್ಲಿ ಟಿಡಿಪಿ ಸಂಸದರು ಹಾಗೂ ಮಾಜಿ ಸಂಸದರು ಭಾಗವಹಿಸಿದ್ದರು.
ಈ ವೇಳೆ ಟಿಡಿಪಿ ಮುಖಂಡರು ಕಪ್ಪು ಬ್ಯಾಡ್ಜ್ ಧರಿಸಿ ನಾಯಕರು ರಾಷ್ಟ್ರಪಿತ ಗಾಂಧೀಜಿಗೆ ನಮನ ಸಲ್ಲಿಸಿದರು. ಸೋಮವಾರ ಪಕ್ಷದ ಸಂಸದರು ಸಂಸತ್ ಆವರಣದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಾಯ್ಡು ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಬಂಧನ ಅಕ್ರಮ ಎಂದು ಘೋಷಣೆಗಳನ್ನು ಕೂಗಿದ್ದರು.
ಬಹುಕೋಟಿ ಕೌಶಲ ಅಭಿವೃದ್ಧಿ ನಿಗಮ ಹಗರಣದಲ್ಲಿ ನಾಯ್ಡು ಅವರನ್ನು ಆಂಧ್ರಪ್ರದೇಶ ಸಿಐಡಿ ಸೆಪ್ಟೆಂಬರ್ 9 ರಂದು ಬಂಧಿಸಿತ್ತು. ಬಳಿಕ ವಿಜಯವಾಡ ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸದ್ಯ ಆವರನ್ನು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.