ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳೊಂದಿಗೆ ‘ಚರ್ಚೆ’ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.
ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆಸಿದ ಸಂವಾದ ಯಾವುದೇ ಫಲ ನೀಡಿಲ್ಲ. ಗೃಹ ಸಚಿವರಿಂದ ತಮಗೆ ಬೇಕಾದ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದರು. ಈ ನಿಟ್ಟಿನಲ್ಲಿ ಟ್ವೀಟ್ ಮಹತ್ವ ಪಡೆದಿದೆ.
ಇದಕ್ಕೂ ಮುನ್ನ, ಮಂಗಳವಾರ, ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯ ಭಾಗವಾಗಿ, ದೆಹಲಿ ಪೊಲೀಸರು ಉತ್ತರ ಪ್ರದೇಶದ ಗೊಂಡಾದಲ್ಲಿರುವ ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಪೊಲೀಸರು ಕಾರ್ಮಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
“ನಾವು ತನಿಖೆಯ ಭಾಗವಾಗಿ ಗೊಂಡಾಗೆ ಭೇಟಿ ನೀಡಿದ್ದೇವೆ ಮತ್ತು ಸಿಂಗ್ ಅವರ ಮನೆಯಲ್ಲಿ ಚಾಲಕ ಸೇರಿದಂತೆ ಅವರ ಸಹಚರರು ಮತ್ತು ಕಾರ್ಮಿಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ತಂಡವು ಅವರ ಐಡಿಗಳನ್ನು ಪರಿಶೀಲಿಸಿದೆ ಮತ್ತು ಹೇಳಿಕೆಗಳನ್ನು ದಾಖಲಿಸುವಾಗ ಅವರ ವಿಳಾಸಗಳನ್ನು ಗಮನಿಸಿದೆ. ನಾವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.