ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಹಲವಾರು ಅಪಘಾತಗಳಿಗೆ ಸಾಕ್ಷಿಯಾಗಿರುವ ಬೆಂಗಳೂರು-ಮೈಸೂರು 10 ಪಥದ ಎಕ್ಸ್ಪ್ರೆಸ್ವೇ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಅಪಘಾತಗಳನ್ನು ತಡೆಗಟ್ಟಲು ಎಕ್ಸ್ ಪ್ರೆಸ್ ವೇಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಪ್ರತಿಕ್ರಿಯೆ ನೀಡಿದ ಗಡ್ಕರಿ ರಸ್ತೆ ಪರಿಶೀಲನೆಗಾಗಿ ತಂಡವನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರಿನಿಂದ ಕರಾವಳಿ ಪ್ರದೇಶಕ್ಕೆ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ನಲ್ಲಿ ಸುರಂಗ ರಸ್ತೆ ನಿರ್ಮಿಸುವ ಕುರಿತಂತೆ ಸಿಎಂ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು. ರಸ್ತೆ ಮಳೆಗಾಲದಲ್ಲಿ ಕುಸಿತ ಕಾಣುತ್ತಿದ್ದು, ಸಂಪರ್ಕ ಸಮಸ್ಯೆ ಕಾಡುತ್ತದೆ. ಇದಕ್ಕಾಗಿ ಸುರಂಗ ರಸ್ತೆ (ಟನಲ್ ರೋಡ್) ಅಗತ್ಯ ಎಂದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಕರ್ನಾಟಕದ ದೆಹಲಿ ಪ್ರತಿನಿಧಿ ಟಿ ಬಿ ಜಯಚಂದ್ರ ಉಪಸ್ಥಿತರಿದ್ದರು.