ನವದೆಹಲಿ: ದೇಶದ ಉನ್ನತ ಚುನಾವಣಾ ಅಧಿಕಾರಿಗಳ ನೇಮಕ ಪ್ರಕ್ರಿಯೆಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡುವ ಕೇಂದ್ರದ ಪ್ರಸ್ತಾವಿತ ಮಸೂದೆಯ ವಿವಾದ ಈಗ ಜೋರಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು 2012 ರಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ. ಅಂತಹ ನೇಮಕಾತಿಗಳ ಮೇಲ್ವಿಚಾರಣೆಗೆ ವಿಶಾಲ ವ್ಯಾಪ್ತಿಯ ಕೊಲಿಜಿಯಂ ರಚಿಸುವಂತೆ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.
ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಲಾದ ಮಸೂದೆಯು ಕೇಂದ್ರ ಸಂಪುಟದ ಸಚಿವರನ್ನು ಒಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ರಾಷ್ಟ್ರಪತಿಗಳು ಉನ್ನತ ಚುನಾವಣಾ ಆಯೋಗದ ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ ಎಂದು ಪ್ರಸ್ತಾಪಿಸಿದ್ದಾರೆ. ಆದರೆ ಅಂದು ಅಡ್ವಾಣಿ ನೀಡಿದ್ದ ಪತ್ರದಲ್ಲಿ ಇಂತಹ ಅಂಶಗಳನ್ನು ವಿರೋಧಿಸಿದ್ದು, ಸಮಿತಿಯು ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. “ಸಾಂವಿಧಾನಿಕ ಸಂಸ್ಥೆಯಾಗಿ ಚುನಾವಣಾ ಆಯೋಗದ ಸ್ವತಂತ್ರ ಕಾರ್ಯನಿರ್ವಹಣೆಗೆ ಮುಖ್ಯ ಚುನಾವಣಾ ಆಯುಕ್ತರ ಕಚೇರಿ ಮತ್ತು ಚುನಾವಣಾ ಆಯುಕ್ತರು ಹಸ್ತಕ್ಷೇಪಗಳಿಂದ ಮುಕ್ತರಾಗಿರಬೇಕು ಎಂದು ಅಡ್ವಾಣಿ ಪತ್ರದಲ್ಲಿ ವಿವರಿಸಿದ್ದರು.