ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳಿಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಜಾಪ್ರಭುತ್ವವನ್ನು ಉಳಿಸಲು ಇಂಡಿಯಾ ಒಕ್ಕೂಟ ಹೋರಾಡುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.
ವಿಜಯ್ ಚೌಕ್ (ಸಂಸತ್ ಭವನದ ಬಳಿ) ಹೊರಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡದೆ ನನಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇಂತಹ ಗೊಡ್ಡು ಬೆದರಿಕೆಗೆ ಇಂಡಿಯಾ (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ) ಬೆದರುವುದಿಲ್ಲ. ಓಡಿಹೋಗಲು ಇದನ್ನು ರಚಿಸಲಾಗಿಲ್ಲ” ಎಂದು ಹೇಳಿದರು.
ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, “ ಬಿಜೆಪಿ ಸರ್ವಾಧಿಕಾರ ಮಾಡುತ್ತಿದೆ. ಏನೇ ಸಂಚು ಹೂಡಿದರೂ 2024 ರಲ್ಲಿ ನಾವು ಅವರನ್ನು ಸೋಲಿಸುತ್ತೇವೆ ಎಂದರು.
“ನಾವು ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ನಮ್ಮಿಂದ ಅಗತ್ಯವಿರುವ ಯಾವುದೇ ತ್ಯಾಗಕ್ಕೂ ನಾವು ಸಿದ್ದರಿದ್ದೇವೆ ಎಂದರು.