ನವದೆಹಲಿ: ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ (ಡಿಪಿಸಿಸಿ) ಅಧ್ಯಕ್ಷರನ್ನಾಗಿ ದೇವೇಂದ್ರ ಯಾದವ್ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇಂದು ಆದೇಶ ಹೊರಡಿಸಿದೆ.
ಈಚೆಗೆ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬೆಳವಣಿಗೆಯು, ರಾಷ್ಟ್ರದ ರಾಜಧಾನಿಯಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಡೆಸುತ್ತಿದ್ದ ಸಿದ್ಧತೆಗೆ ಹಿನ್ನಡೆ ಉಂಟುಮಾಡಿತ್ತು.
ದೆಹಲಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಅಸಮಾಧಾನ ಮತ್ತು ಕಾಂಗ್ರೆಸ್ನ ದೆಹಲಿ ಉಸ್ತುವಾರಿ ದೀಪಕ್ ಬಾಬರಿಯಾ ಅವರ ನಡವಳಿಕೆಯನ್ನು ವಿರೋಧಿಸಿ ಅರವಿಂದರ್ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದರು.
‘ನಾನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಯಾವುದೇ ಪಕ್ಷವನ್ನು ಸೇರುತ್ತಿಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ‘ಲವ್ಲಿ ಬಿಜೆಪಿ ಸೇರಲಿದ್ದು, ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಆ ಪಕ್ಷವು ಅವರನ್ನು ಕಣಕ್ಕಿಳಿಸಲಿದೆ’ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಆಸಿಫ್ ಮೊಹಮ್ಮದ್ ಖಾನ್ ಹೇಳಿಕೆ ನೀಡಿದ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ಕೊಟ್ಟಿದ್ದರು.