ಚಂಡೀಗಡ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿವೈಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಮೇವಾಟ್ ಪ್ರದೇಶದಲ್ಲಿ ಗಣಿ ಮಾಫಿಯಾ ಹತ್ಯೆ ಮಾಡಿರುವ ಪ್ರಕರಣದ ನ್ಯಾಯಾಂಗ ತನಿಖೆಗೆ ಹರಿಯಾಣ ಸರ್ಕಾರ ಆದೇಶಿಸಿದೆ.
ಹರಿಯಾಣದ ನೂಹ್ ಜಿಲ್ಲೆಯ ಅರಾವಳಿ ಬೆಟ್ಟ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿವೈಎಸ್ಪಿ ಸುರೇಂದ್ರ ಸಿಂಗ್ ಮೇಲೆ ಅಕ್ರಮ ಕಲ್ಲುಗಣಿಗಾರಿಕೆ ಮಾಫಿಯಾದವರು ಟ್ರಕ್ ಹರಿಸಿ ಮಂಗಳವಾರ ಹತ್ಯೆ ಮಾಡಿದ್ದರು.
ಅರಾವಳಿ ಬೆಟ್ಟ ಪ್ರದೇಶದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು. ಈ ಪ್ರಕರಣದ ನ್ಯಾಯಾಂಗ ತನಿಖೆಗೆ ಸರ್ಕಾರ ತೀರ್ಮಾನಿಸಿದೆ ಎಂದು ವಿಜ್ ತಿಳಿಸಿದ್ದಾರೆ. ಪ್ರಮುಖ ಆರೋಪಿ ಸಬ್ಬೀರ್ ಅಲಿಯಾಸ್ ಮಿತ್ತರ್ನನ್ನು ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಇಕ್ಕರ್ನನ್ನು ನೂಹ್ ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಡಿವೈಎಸ್ಪಿ ಹತ್ಯೆಗೆ ಸಂಬಂಧಿಸಿದಂತೆ ನಡೆಯುವ ಕಾರ್ಯಪಾಲನಾ ವರದಿಯನ್ನು (ಎಟಿಆರ್) ಪರಿಶೀಲಿಸಬೇಕೆಂದು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ಈ ಪ್ರದೇಶದಲ್ಲಿನ ಅಕ್ರಮ ಗಣಿಗಾರಿಕೆಯ ಮೇಲ್ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತ್ವತ್ವದ ಪೀಠ ನಡೆಸುತ್ತಿದೆ.