ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಇತ್ತೀಚೆಗೆ ಎರಡು ಸೇನಾ ವಾಹನಗಳ ಮೇಲೆ ಹೊಂಚುದಾಳಿಯಿಂದ ಐವರು ಸೈನಿಕರನ್ನು ಕೊಂದ ಭಯೋತ್ಪಾದಕರನ್ನು ಪತ್ತೆಹಚ್ಚಲು ಭಾರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಧರ ಸಾವಿನ ತನಿಖೆಗಾಗಿ ಶಂಕಿತರನ್ನು ಕರೆದೊಯ್ದ ಚಿತ್ರಹಿಂಸೆ ನೀಡುತ್ತಿದ್ದಾರೆ ಎನ್ನಲಾದ ವೀಡಿಯೊ ಬಿತ್ತರಗೊಂಡಿದೆ. ಇದು ಜನರಲ್ಲಿ ವ್ಯಾಪಕ ಅಸಮಾಧಾನವನ್ನು ಉಂಟುಮಾಡಿದೆ. ಈ ಕಾರಣದಿಂದಾಗಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಅಮಾನತುಗೊಳಿಸಲಾಗಿದೆ.
ಗುರುವಾರದ ದಾಳಿಗೆ ಸಂಬಂಧಿಸಿದಂತೆ ಸೇನೆಯಿಂದ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ಮೂವರು ವ್ಯಕ್ತಿಗಳು ಶುಕ್ರವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ತನಿಖೆ ಮುಂದುವರೆದಿದ್ದು, ಅವರ ಮೃತದೇಹಗಳನ್ನು ಅಂತಿಮ ವಿಧಿಗಳಿಗಾಗಿ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೃತರನ್ನು ಬುಫ್ಲಿಯಾಜ್ನ ಟೋಪಾ ಪೀರ್ ಗ್ರಾಮದ ಸಫೀರ್ ಹುಸೇನ್ (43), ಮೊಹಮ್ಮದ್ ಶೋಕೆಟ್ (27) ಮತ್ತು ಶಬೀರ್ ಅಹ್ಮದ್ (32) ಎಂದು ಗುರುತಿಸಲಾಗಿದೆ. ಆದರೆ ಅವರ ಸಾವಿಗೆ ಕಾರಣ ತಿಳಿದುಬಂದಿಲ್ಲ.
ಕಿಡಿಗೇಡಿಗಳು ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಸೃಷ್ಟಿಸುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.