ಕಾಶ್ಮೀರ: ಏಕದಿನ ವಿಶ್ವಕಪ್ ಫೈನಲಿನಲ್ಲಿ ಭಾರತ ತಂಡ ಸೋತಾಗ ಇಡೀ ದೇಶವೇ ದುಃಖದಲ್ಲಿ ಮುಳುಗಿತ್ತು. ಆದರೆ, ಕೆಲ ಕಿಡಿಗೇಡಿಗಳು ಭಾರತದ ಸೋಲನ್ನು ಸಂಭ್ರಮಿಸಿರುವ ಘಟನೆ ನಡೆದಿದ್ದು, ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯು ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿರುವ ಶೇರ್-ಎ-ಕಾಶ್ಮೀರ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಸುಮಾರು 300 ಜನರು ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಈ ಪೈಕಿ ಹೆಚ್ಚಿನವರು ಪಂಜಾಬ್, ರಾಜಸ್ಥಾನ ಹಾಗೂ ನೆರೆಯ ರಾಜ್ಯದವರಾಗಿದ್ದಾರೆ.
ನವೆಂಬರ್ 19ರಂದು ನಡೆದ ಏಕದಿನ ವಿಶ್ವಕಪ್ ಫಿನಾಲೆಯಲ್ಲಿ ಭಾರತ ಸೋತ ಬಳಿಕ ಸ್ಥಳೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಕಾಲೇಜಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದ 7 ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.