ಕಾಸರಗೋಡು (ಕೇರಳ) : ಕೇರಳದ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಪಟ್ಟಣದ ಆಹಾರ ಮಳಿಗೆಯಲ್ಲಿ ಕೊಳೆತ ಷವರ್ಮಾ ಸೇವಿಸಿದ ನಂತರ 17 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬರು ಫುಡ್ ಪಾಯ್ಸನ್ ಆಗಿ ಸಾವನ್ನಪ್ಪಿದ್ದು, 18 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ದೇವಾನಂದ ಎಂದು ಗುರುತಿಸಲಾಗಿದೆ. ಇವರನ್ನು ಪರೀಕ್ಷಿಸಿದ ಮಕ್ಕಳ ತಜ್ಞರನ್ನೊಳಗೊಂಡ ವೈದ್ಯರ ತಂಡವು ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಉಳಿದಂತೆ 18 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಕಾಸರಗೋಡು ವೈದ್ಯಕೀಯ ಅಧಿಕಾರಿ ತಿಳಿಸಿದ್ದಾರೆ.
ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ಏತನ್ಮಧ್ಯೆ, ವಿದ್ಯಾರ್ಥಿಗಳು ಷಾವರ್ಮಾ ಸೇವಿಸಿದ ಅಂಗಡಿಯನ್ನು ಸೀಲ್ ಮಾಡಲಾಗಿದ್ದು, ಅಡುಗೆಯವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಷವರ್ಮಾ ಮಾದರಿಗಳನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.