ಭೋಪಾಲ್: ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಮಧ್ಯ ಪ್ರದೇಶ ಸರ್ಕಾರವು ಗುರುವಾರ ರಾತ್ರಿಯಿಂದ ರಾಜ್ಯದಲ್ಲಿ ರಾತ್ರಿ 11ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿಸಿದೆ.
‘ಜಗತ್ತಿನಾದ್ಯಂತ ಓಮೈಕ್ರಾನ್ ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಇದು ಸರಿಯಾದ ಸಮಯ. ಕೇಂದ್ರ ಸರ್ಕಾರ ಕೂಡ ಮಾರ್ಗಸೂಚಿ ಪ್ರಕಟಿಸಿದೆ. ಹೀಗಾಗಿ ನಾವು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಅಗತ್ಯವೆನಿಸಿದಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಿಗೆ ಸೂಚಿಸಲಾಗಿದೆ. ಮಧ್ಯ ಪ್ರದೇಶದಲ್ಲಿ ಈವರೆಗೆ ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ.
ರಾಜ್ಯದಲ್ಲಿ ಯಾವುದೇ ಕೋವಿಡ್ ಪ್ರಕರಣ ಪತ್ತೆಯಾದರೂ ಸೋಂಕಿತರಿಗೆ ಪ್ರತ್ಯೇಕ ವಾಸ, ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಅವಕಾಶವಿಲ್ಲದಿದ್ದರೆ ಆಸ್ಪತ್ರೆಗೆ ದಾಖಲಾತಿ ಮಾಡಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳನ್ನು ಮಧ್ಯ ಪ್ರದೇಶ ಸರ್ಕಾರ ಕೈಗೊಂಡಿದೆ.