ಛತ್ತರ್ಪುರ: ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯ ನ್ಯಾಯಾಲಯದಲ್ಲಿ ನಿಯೋಜಿತರಾಗಿದ್ದ ನ್ಯಾಯಾಧೀಶರು ಟ್ರಾಕ್ಟರ್ ಟ್ರಾಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದು, ಅವರ ಸಹೋದ್ಯೋಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಛತ್ತರ್ಪುರ ಜಿಲ್ಲಾ ಕೇಂದ್ರದಿಂದ ಸುಮಾರು 12 ಕಿಮೀ ದೂರದಲ್ಲಿರುವ ಸಾಗರ್-ಕಾನ್ಪುರ್ ರಸ್ತೆಯಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಶಶಾಂಕ್ ಜೈನ್ ತಿಳಿಸಿದ್ದಾರೆ.
ಬಡಾ ಮಲ್ಹೇರಾದಲ್ಲಿ ಪ್ರಥಮ ದರ್ಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್ಸಿ) ಆಗಿ ನೇಮಕಗೊಂಡಿರುವ ರಿಷಿ ತಿವಾರಿ ಮತ್ತು ಆಶಿಶ್ ಮಥೋರಿಯಾ ಅವರು ಛತ್ತರ್ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಮಟ್ಗುವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ಯಾರಾ ಚೌಕಿ ಬಳಿ ಅವರ ಕಾರು ನಿಂತಿದ್ದ ಟ್ರಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿವಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಲಾಯಿಸುತ್ತಿದ್ದ ಮಥೋರಿಯಾ ಮತ್ತು ರಾಮ್ ದಿನಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಛತ್ತರ್ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಗ್ವಾಲಿಯರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈನ್ ಹೇಳಿದ್ದಾರೆ.