ಭೋಪಾಲ್: ಶನಿವಾರ ನಸುಕಿನಲ್ಲಿ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ರಾಜ್ಯ ರಾಜಧಾನಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಅರಾನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮುಂಜಾನೆ 3 ಗಂಟೆಯ ಸುಮಾರಿನಲ್ಲಿ ಪೊಲೀಸ್ ಸಿಬ್ಬಂದಿ ದುಷ್ಕರ್ಮಿಗಳನ್ನು ಸೆರೆಹಿಡಿಯಲು ಹೋದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ನಿವಾಸದಲ್ಲಿ ಬೆಳಿಗ್ಗೆ 9.30ಕ್ಕೆ ಉನ್ನತ ಮಟ್ಟದ ತುರ್ತು ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಜಿಪಿ, ಗೃಹ ಸಚಿವರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.
‘ಅಪರೂಪದ ನಾಲ್ಕು ಜಿಂಕೆಗಳನ್ನು ಕೆಲವು ದುಷ್ಕರ್ಮಿಗಳು ಕೊಂದಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ, ಗುನಾ ಜಿಲ್ಲೆಯ ಅರೋನ್ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಥಳವೊಂದಕ್ಕೆ ತೆರಳಿದ್ದರು. ಪೊಲೀಸ್ ಸಿಬ್ಬಂದಿ ಆರೋಪಿಗಳನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದರು. ಆಗ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪೊಲೀಸರು ಮೃತಪಟ್ಟಿದ್ದಾರೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜ್ಕುಮಾರ್ ಜಾತವ್ ಮತ್ತು ಕಾನ್ಸ್ಟೆಬಲ್ಗಳಾದ ನಿಲೇಶ್ ಭಾರ್ಗವ ಮತ್ತು ಶಾಂತಾರಾಮ್ ಮೀನಾ ಅವರು ಗುಂಡಿನ ದಾಳಿಯಲ್ಲಿ ಅಸುನೀಗಿದ್ದಾರೆ’ ಎಂದು ಮಿಶ್ರಾ ಹೇಳಿದ್ದಾರೆ
ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ನರೋತ್ತಮ ಮಿಶ್ರಾ ತಿಳಿಸಿದರು.