ಭೋಪಾಲ್: ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.
ಮಧ್ಯಪ್ರದೇಶದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ನೆಲೆದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಆರೋಪಿ ಸಿಗರೇಟ್ ಸೇದುತ್ತಾ ಅಮಲೇರಿದ ಸ್ಥಿತಿಯಲ್ಲಿ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿದೆ.
ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಮಾತ್ರವಲ್ಲದೇ ರೇವಾದ ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಅವರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ.
ಶುಕ್ಲಾ ವಿರುದ್ಧ ಎನ್ಎಸ್ಎ, ಎಸ್ಸಿ/ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.