ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಮಂಗಳವಾರ ಸಂಜೆ ಭೋಪಾಲ್ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮಂಗಳವಾರ ಸಂಜೆಯಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಎರಡು ದಿನಗಳ ಚಿಂತನ-ಮಂಥನ ಅಧಿವೇಶನದಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರು ದೆಹಲಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.
ಭೋಪಾಲ್ ವಿಮಾನ ನಿಲ್ದಾಣದ ನಿರ್ದೇಶಕ ರಾಮ್ಜಿ ಅವಸ್ಥಿ ಈ ಬಗ್ಗೆ ಮಾಹಿತಿ ನೀಡಿದ್ದು, ವಿಮಾನ ತುರ್ತು ಲ್ಯಾಂಡಿಂಗ್ ಗೆ ಅನುಮತಿ ಕೇಳಿದ್ದು, ಅದನ್ನು ಒದಗಿಸಿದ್ದೇವೆ ಎಂದು ಹೇಳಿದ್ದಾರೆ. ವಿಮಾನ ತುರ್ತು ಭೂಸ್ಪರ್ಶ ಮಾಡಿದ ಬಳಿಕ ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಸೋನಿಯಾ ಅವರನ್ನು ಭೇಟಿಯಾಗಲು ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.