ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿರುವ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್ನಲ್ಲಿ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುಂಬೈ ಸೆಷನ್ಸ್ ಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಳಿಕ, ಅವರನ್ನು ಗೃಹಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಕಳೆದ ವರ್ಷದ ನವೆಂಬರ್ 1ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಅವರನ್ನು ಬಂಧಿಸಿತ್ತು.