ನಾಸಿಕ್: ಶಿರಡಿ ಸಾಯಿಬಾಬಾ ಭಕ್ತರನ್ನು ಕರೆದೊಯ್ಯುತ್ತಿದ್ದ ಖಾಸಗಿ ಐಷಾರಾಮಿ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆಯ ಅಂಬರ್ ನಾಥ್ ನಿಂದ ಅಹ್ಮದ್ ನಗರ ಜಿಲ್ಲೆಯ ದೇವಾಲಯ ಪಟ್ಟಣವಾದ ಶಿರಡಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ.
ಶಿಂಧೆ ಅವರು ಅಪಘಾತ, ಕಾರಣಗಳು ಮತ್ತು ಸಂಬಂಧಿತ ಅಂಶಗಳ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಕನಿಷ್ಠ ಆರು ಮಹಿಳೆಯರು, ಒಬ್ಬ ಪುರುಷ ಮತ್ತು ಉಳಿದವರು ಮಕ್ಕಳು.
ಗಾಯಗೊಂಡವರನ್ನು ಸಿನ್ನಾರ್ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಕೆಲವು ಗಂಭೀರ ಗಾಯಗೊಂಡವರನ್ನು ಪುಣೆ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.