ನಾಗ್ಪುರ: ನಾಗ್ಪುರ-ಮುಂಬೈ ಸೂಪರ್-ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 25 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದರ್ಭ ಟ್ರಾವೆಲ್ಸ್ಗೆ ಸೇರಿದ ಬಸ್ ನಾಗ್ಪುರದಿಂದ ಪುಣೆಗೆ ಪ್ರಯಾಣಿಸುತ್ತಿದ್ದು, ನಸುಕಿನ ಜಾವ 1.15 ರ ಸುಮಾರಿಗೆ ಸಿಂಧಖೇದರಾಜ ಪ್ರದೇಶದ ಬಳಿ ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬಸ್ ವೇಗವಾಗಿ ಚಲಿಸುತ್ತಿದ್ದಾಗ ಎಕ್ಸ್ಪ್ರೆಸ್ ವೇ ಡಿವೈಡರ್, ನಂತರ ಕಂಬಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಸಾಗಿ ನಿಯಂತ್ರಣ ತಪ್ಪಿ ಸ್ಫೋಟ ಸಂಭವಿಸಿದೆ. ನಂತರ ಬಸ್ ಬೆಂಕಿಗೆ ಆಹುತಿಯಾಗಿದೆ. ಇಬ್ಬರು ಚಾಲಕರು ಮತ್ತು ಕ್ಲೀನರ್ ಸೇರಿದಂತೆ ಬಸ್ನಲ್ಲಿ ಒಟ್ಟು 33 ಜನರಿದ್ದರು. 25 ಜನರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, ಐವರು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬುಲ್ಧಾನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತದ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ. ಅಪಘಾತದಲ್ಲಿ ಓರ್ವ ಚಾಲಕ ಸಾವನ್ನಪ್ಪಿದ್ದು, ಎರಡನೆಯ ಚಾಲಕನಿಂದ ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.