ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ದಿನದಿಂದ ದಿನಕ್ಕೆ ಭುಗಿಲೇಳುತ್ತಿದೆ. ಮಹಿಳೆಯರನ್ನ ಬೆತ್ತಲೆ ಮೆರವಣಿಗೆ ನಡೆಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅದೇ ದಿನ ಮತ್ತಿಬ್ಬರು ಯುವತಿಯರ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಇದೀಗ ಸ್ವಾತಂತ್ರ್ಯ ಹೋರಾಟಗಾರನೊಬ್ಬರ ಪತ್ನಿಯನ್ನ ಸಜೀವ ದಹನ ಮಾಡಿರುವ ಘಟನೆ ಜನರನ್ನ ಬೆಚ್ಚಿ ಬೀಳಿಸಿದೆ.
ಕಾಕ್ಚಿಂಗ್ ಜಿಲ್ಲೆಯ ಸೆರೋ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರನ ಪತ್ನಿ 80 ವರ್ಷದ ಮಹಿಳೆಯನ್ನ ಮನೆಯೊಳಗೆ ಕೂಡಿಹಾಕಿಕೊಂಡು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಮೇ 28ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಸೆರೋ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ.
ಮೃತ ಮಹಿಳೆ ಸ್ವಾತಂತ್ರ್ಯ ಹೋರಾಟಗಾರ ಎಸ್.ಚೂರಚಂದ್ ಸಿಂಗ್ ಅವರ ಪತ್ನಿ. ಚೂರಚಂದ್ ಭಾರತದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಿಂದ ಗೌರವಿಸಲ್ಪಟ್ಟಿದ್ದರು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.