ತಿರುವನಂತಪುರ: ಕೋಯಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿರುವ ನಿಪಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಣದಲ್ಲಿದೆ. ಆದರೆ, ರಾಜ್ಯದಲ್ಲಿ ಆತಂಕ ಕೊನೆಗೊಂಡಿಲ್ಲ. ಸೋಂಕಿನ ೨ನೇ ಅಲೆಯ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಪಾ ಭೀತಿ ಸಂಪೂರ್ಣವಾಗಿ ಮುಗಿದಿದೆ ಎಂದು ಹೇಳಲಾಗದು. ಆದರೆ, ಸೋಂಕು ಹೆಚ್ಚಿನ ಜನರಿಗೆ ಹರಡಿಲ್ಲದಿರುವುದು ಸಮಾಧಾನದ ಸಂಗತಿ ಎಂದು ಹೇಳಿದ್ದಾರೆ.
ವೈರಾಣುವನ್ನು ಆರಂಭದಲ್ಲೇ ಪತ್ತೆ ಹಚ್ಚಿದ್ದರಿಂದಾಗಿ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗದಂತೆ ತಡೆಯಲು ಸಾಧ್ಯವಾಗಿದೆ. ಸೋಂಕಿನ ೨ನೇ ಅಲೆಯ ಸಾಧ್ಯತೆ ತೀರಾ ಕಡಿಮೆ. ಆದರೆ, ಸಂಪೂರ್ಣವಾಗಿ ನಿರಾಕರಿಸಲು ಸಾಧ್ಯವಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.