ನವದೆಹಲಿ: ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಅದರಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 4 ರಾಜ್ಯಗಳ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ. 3 ರಾಜ್ಯಗಳ ಗೆಲುವು 2024ರ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿಯಾಗಿದೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಜನರ ಮೇಲೆ ಬಹಳ ವಿಶ್ವಾಸವಿತ್ತು, ಅದರಂತೆ ಬಿಜೆಪಿ ಗೆಲ್ಲಿಸಿದ್ದಾರೆ. ಛತ್ತೀಸಗಢ್ನಲ್ಲಿ ಮೊದಲ ಪ್ರಚಾರ ಸಭೆಯಲ್ಲಿ ನಾನು ಹೇಳಿದ್ದೆ. ನಾನು ನಿಮಗೆ ಪ್ರಮಾಣಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಬಂದಿದ್ದೇನೆ. ತೆಲಂಗಾಣದಲ್ಲಿ ಈ ಬಾರಿ ಬಿಜೆಪಿ ಮತ್ತಷ್ಟು ಪ್ರಬಲಗೊಂಡಿದೆ. ತೆಲಂಗಾಣದ ಅಭಿವೃದ್ಧಿಯನ್ನು ನಾವು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ, ವಂದೇ ಭಾರತ್ ರೈಲಿಗೆ ಚಾಲನೆ ನೀಡಿದಾಗ ಕಾಂಗ್ರೆಸ್ ವ್ಯಂಗ್ಯವಾಡಿತ್ತು. ಆಯುಷ್ಮಾನ್ ಭಾರತ ಯೋಜನೆ, ಬಡವರಿಗೆ ಮನೆ ನಿರ್ಮಿಸಿ ಕೊಟ್ಟಾಗ ಬಿಜೆಪಿ ಯೋಜನೆಗಳ ಬಗ್ಗೆ ಕಾಂಗ್ರೆಸ್ನವರು ವ್ಯಂಗ್ಯವಾಡಿದ್ದರು. ಕಾಂಗ್ರೆಸ್ ಮತ್ತುಅದರ ಅಂಗಪಕ್ಷಗಳಿಗೆ ನಾನು ವಿನಮ್ರತೆಯಿಂದ ಮನವಿ ಮಾಡುತ್ತೇನೆ ದೇಶವಿರೋಧಿ ಚಟುವಟಿಕೆ ಮತ್ತು ದೇಶ ಇಬ್ಭಾಗಿಸುವ ಜನರಿಗೆ ಬೆಂಬಲ ನೀಡಬೇಡಿ ಎಂದು ಮನವಿ ಮಾಡಿದರು.