ನವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ನಾಳೆ ಎರಡನೇ ಹಂತದ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಈತನ್ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ದೇಶದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ (ಶುಕ್ರವಾರ) ನಡೆಯಲಿದ್ದು, ಈ ಹಂತದಲ್ಲಿ ಕೇರಳದ ವಯನಾಡಿನಲ್ಲೂ ಮತದಾನ ನಡೆಯಲಿದೆ. ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಕಣದಲ್ಲಿದ್ದಾರೆ.
ಇಲ್ಲಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕಿ ಅನ್ನಿ ರಾಜಾ ಅವರನ್ನು ಎದುರಿಸಲಿದ್ದಾರೆ. ಇದರ ಜೊತೆಗೆ ಉತ್ತರ ಪ್ರದೇಶದ ಎರಡು ಹೈ ಪ್ರೊಫೈಲ್ ಕ್ಷೇತ್ರಗಳಾದ ರಾಯ್ ಬರೇಲಿ ಮತ್ತು ಅಮೇಥಿಯ ಮೇಲೂ ಎಲ್ಲರ ದೃಷ್ಟಿ ನೆಟ್ಟಿದೆ.
ರಾಯ್ ಬರೇಲಿ ಮತ್ತು ಅಮೇಥಿ ಎರಡೂ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಏಪ್ರಿಲ್ 26 ರಿಂದಲೇ ಪ್ರಾರಂಭವಾಗಲ್ಲಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಮೇಠಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಈ ಸ್ಥಾನಗಳ ಉಮೇದುವಾರಿಕೆ ಘೋಷಣೆಗೂ ಮುನ್ನ ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಇಂದು ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆಯುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈ ಎರಡೂ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಆದರೆ ಈ ಎರಡು ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಅಧಿಕೃತ ಘೋಷಣೆಯನ್ನು ಏಪ್ರಿಲ್ 30 ರ ಮೊದಲು ಮಾಡಲಾಗುವುದಿಲ್ಲ ಎಂದು ಮೂಲಗಳು ಹೇಳಿವೆ