ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಶುಭಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆಯವರು, ‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾಂವಿಧಾನಿಕ ಮೌಲ್ಯಗಳಿಗೆ ನಿಮ್ಮ ಅಚಲ ಬದ್ಧತೆ ಮತ್ತು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಅದಮ್ಯ ಧೈರ್ಯ ಮೆಚ್ಚುವಂತದ್ದು. ಸಹಾನುಭೂತಿ ಮತ್ತು ಸಾಮರಸ್ಯದ ಸಂದೇಶ ಹರಡುವುದನ್ನು ಮುಂದುವರಿಸಿ. ನಿಮ್ಮ ಸಂದೇಶ ಲಕ್ಷಾಂತರ ಭಾರತೀಯರ ಧ್ವನಿಯಾಗಲಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು ದೇಶದಾದ್ಯಂತ ಸೌಹಾರ್ದತೆಯ ಸಿಹಿ ಹಂಚಿ ಭಾರತೀಯರ ಮನಸ್ಸುಗಳನ್ನು ಜೋಡಿಸುತ್ತಿರುವ ಭವಿಷ್ಯದ ಭರವಸೆಯ ಆಶಾಕಿರಣ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಹೇಳಿದ್ದಾರೆ.