ಜೈಪುರ್: ರಾಜಸ್ಥಾನದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗಲಭೆ, ಅಪರಾಧ, ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್ ನಂಬರ್ 1 ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ದಿಯೋಗರ್ನಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವರು ಆರೋಪಗಳ ಮಳೆ ಸುರಿಸಿದ್ದಾರೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಬಿಜೆಪಿ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದೆ. ಡಿ.3 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ, ನಾವು ರಾಜ್ಯದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಮತ್ತೆ ಆರಂಭಿಸುತ್ತೇವೆ. ಈ ಮೂಲಕ ರಾಜಸ್ಥಾನವನ್ನು ಅಭಿವೃದ್ಧಿಯ ದಿಕ್ಕಿಗೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. 200 ವಿಧಾನಸಭಾ ಸ್ಥಾನಗಳ ಪೈಕಿ 199 ಕ್ಷೇತ್ರಗಳಲ್ಲಿ ನ.25 ರಂದು ಮತದಾನ ನಡೆಯಲಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ.