ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದು ಆದೇಶವನ್ನು ಎತ್ತಿಹಿಡಿದಿದೆ. ಇತ್ತ ಕೇಂದ್ರ ಸರ್ಕಾರ ಕಾಶ್ಮೀರ ಕುರಿತು ತಂದ 2 ಬಿಲ್ಗಳನ್ನು ರಾಜ್ಯಸಭೆ ಅಂಗೀಕರಿಸಿದೆ. ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್ವಿಂಗಡನಾ (ತಿದ್ದುಪಡಿ) ಮಸೂದೆ ಇದೀಗ ರಾಜ್ಯಸಭೆಯಲ್ಲೂ ಪಾಸ್ ಆಗಿದೆ. ಈ ಮಸೂದೆ ತಿದ್ದುಪಡಿಯಲ್ಲಿ ಪ್ರಮುಖ ಅಂಶಗಳ ಪೈಕಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಶ್ಮೀರದ ಪಂಡಿತರಿಗೆ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಿರಾಶ್ರಿತರಿಗೆ 2 ಸ್ಥಾನ ಮೀಸಲಿಡಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್ವಿಂಗಡನಾ (ತಿದ್ದುಪಡಿ) ಮಸೂದೆಯನ್ನು ಡಿಸೆಂಬರ್ 6 ರಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದರು. ಈ ಮಸೂದೆಯ ಲೋಕಸಭೆಯಲ್ಲಿ ಪಾಸ್ ಆಗಿತ್ತು. ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡಿಸಲಾಗಿತ್ತು. ರಾಜ್ಯಸಭೆಯಲ್ಲೂ ಕೇಂದ್ರದ ಈ ಮಸೂದೆಗೆ ಅಂಗೀಕಾರ ದೊರೆತಿದೆ.