ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚೆನ್ನೈಗೆ ಭೇಟಿ ನೀಡಲಿದ್ದಾರೆ. ನಗರದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಮೋದಿ ಅವರು ₹ 31,500 ಕೋಟಿ ಮೊತ್ತದ 11 ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮೋದಿ ಭೇಟಿಗೆ ಮೊದಲು ನಗರದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. 22,000 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಐದು ಹಂತಗಳ ಭದ್ರತಾ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಯಾವುದೇ ಅನಪೇಕ್ಷಿತ ಬೆಳವಣಿಗೆಗಳು ಆಗದಂತೆ ತಡೆಯಲು ಪೊಲೀಸರು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. ಪೊಲೀಸ್ ಆಯುಕ್ತ ಶಂಕರ್ ಜೀವಾಳ್ ಭದ್ರತೆಯ ಉಸ್ತುವಾರಿ ಹೊತ್ತಿದ್ದಾರೆ. ಎಂಟು ಮಂದಿ ಜಂಟಿ ಆಯುಕ್ತರು (ಜೆಸಿ), 29 ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ (ಡಿಐಜಿ), ಎಸ್ಪಿಗಳು ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಚೆನ್ನೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜವಾಹರಲಾಲ್ ಹೆಹರು ಒಳಾಂಗಣ ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿಯೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಮತ್ತು ಮಾನವರಹಿತ ವೈಮಾನಿಕ ಉಪಕರಣಗಳ ಹಾರಾಟವನ್ನು ನಿಷೇಧಿಸಲಾಗಿದೆ.