ನಾಗಪಟ್ಟಣಂ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ದೇಶೀಯ ನಿರ್ಮಿತ ಸಿಡಿಮದ್ದು ತಯಾರಿಕೆ ವೇಳೆ ಸ್ಫೋಟ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ದೀಪಾವಳಿಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ, ಈ ಪ್ರದೇಶದ ಕಾರ್ಮಿಕರು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು. ಉತ್ಪಾದನೆ ವೇಳೆ ಏಕಾಏಕಿ ಸಂಭವಿಸಿದ ಬೆಂಕಿಯಿಂದಾಗಿ ತಯಾರಾಗಿದ್ದ ಸ್ಫೋಟಕಗಳು ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ವಿವಿಧೆಡೆ ಸುಮಾರು 100 ಮೀಟರ್ ದೂರದಲ್ಲಿ ಶವದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ ಶವಗಳನ್ನು ಗುರುತಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ.ಘಟನೆಯ ಸಮಯದಲ್ಲಿ ಕಾರ್ಖಾನೆಯೊಳಗೆ ಎಂಟು ಜನರಿದ್ದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪಟಾಕಿ ಕಾರ್ಖಾನೆಯು 2023 ರಿಂದ 2026 ರವರೆಗೆ ಪರವಾನಗಿ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.