ಹೈದರಾಬಾದ್: ಹೈದರಾಬಾದ್ ಮೂಲದ ಇಂಟೆಲಿಜೆನ್ಸ್ ಬ್ಯೂರೋ ನ ಸಹಾಯಕ ನಿರ್ದೇಶಕರೊಬ್ಬರು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದ ವೇಳೇ ಇಲ್ಲಿನ ಸಭಾಂಗಣದ ವೇದಿಕೆಯಿಂದ ಆಕಸ್ಮಿಕವಾಗಿ ಬಿದ್ದು ಬುಧವಾರ ಮೃತಪಟ್ಟಿರುವ ಘಟನೆ ನಡೆದಿದೆ.
ತೆಲಂಗಾಣ ಪೊಲೀಸರ ಐಬಿ, ಐಎಸ್ಡಬ್ಲ್ಯು (ಗುಪ್ತಚರ ಭದ್ರತಾ ವಿಭಾಗ) ಮತ್ತು ಇತರ ಪೊಲೀಸ್ ಅಧಿಕಾರಿಗಳ ತಂಡವು ಮೇ 20ರಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಭಾಗವಹಿಸಲಿರುವ ಸಮಾರಂಭದಲ್ಲಿ ಭದ್ರತೆಯನ್ನು ಪರಿಶೀಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರನ್ನು ಬಿಹಾರ ಮೂಲದ 51 ವರ್ಷದ ಐಬಿ ಅಧಿಕಾರಿ ಕುಮಾರ್ ಎ ಎನ್ನಲಾಗಿದೆ. ಇವರು ಸಭಾಂಗಣದ ಛಾಯಾಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದ ವೇಳೆ ವೇದಿಕೆಯಿಂದ ಜಾರಿ ಬಿದ್ದು ತಲೆಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಘಟನೆಯ ದೃಶ್ಯಾವಳಿಯು ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.