ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಮಾವೋವಾದಿ ಸಾವನ್ನಪ್ಪಿದ್ದಾನೆ.
ಭದ್ರಾದ್ರಿ ಕೊಥಗುಡೆಮ್ ಪ್ರದೇಶದಲ್ಲಿ ಪೊಲೀಸರ ವಿಶೇಷ ಪಡೆಯು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಿಗ್ಗೆ 8.15ರ ಸುಮಾರಿಗೆ ಘಟನೆ ನಡೆದಿದೆ. ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಸದಸ್ಯರು ಮೊದಲು ಗುಂಡಿನ ದಾಳಿ ನಡೆಸಿದ್ದಾರೆ.
ಇದಕ್ಕೆ ಪೊಲೀಸ್ ಸಿಬ್ಬಂದಿ ಪ್ರತ್ಯುತ್ತರ ನೀಡಿದ್ದಾರೆ. ಈ ವೇಳೆ ಒಬ್ಬ ಮಾವೋವಾದಿ ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಹತ್ಯೆಯಾದ ಮಾವೋವಾದಿಯ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಒಂದು .303 ರೈಫಲ್ ಮತ್ತು ಎರಡು ಕಿಟ್ ಬ್ಯಾಗ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.