ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ನಿನ್ನೆ ನಡೆದ ಹಿಂಸಾಚಾರ ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೀಗ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ.
ಯಾದವ್ ಅವರು ಘಟನಾ ಸ್ಥಳಕ್ಕೆ ತೆರಳದಂತೆ ನಿರ್ಬಂಧ ಹೇರಿದ್ದಾರೆ. ಮನೆ ಮುಂದೆ ಪೊಲೀಸ್ ಸರ್ಪ ಗಾವಲು ನಿಯೋಜನೆ ಮಾಡಲಾಗಿದೆ. ಯಾದವ್ ಅವರ ಲಖನೌ ಮನೆ ಬಳಿ ಇರುವ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ.
ಯಾದವ್ ಅವರನ್ನು ಗೃಹ ಬಂಧನದಲ್ಲಿಡುತ್ತಿದ್ದಂತೆಯೇ ನೂರಾರು ಬೆಂಬಲಿಗರು ಮನೆ ಮುಂದೆ ಜಮಾಯಿಸಿದ್ದು, ಧರಣಿ ಮಾಡುತ್ತಿದ್ದಾರೆ. ಯಾದವ್ ಕೂಡ ತಮ್ಮ ಬೆಂಬಲಿಗರೊಂದಿಗೆ ಧರಣಿ ನಡೆಸುತ್ತಿದ್ದಾರೆ.
ಘಟನಾ ಸ್ಥಳ ಲಖೀಂಪುರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಇಂಟರ್ ನೆಟ್ ಸೇವೆ ಸ್ಥಗಿತ ಮಾಡಿದ್ದಾರೆ ಎಂದು ತಿಳಿದು ಬಂದಿದೆ.