ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ದುರಂತ ಸಂಭವಿಸಿದ್ದು, ಇಂದು ಘಟನಾ ಸ್ಥಳಕ್ಕೆ ಹಾಗೂ ರೈತ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಡೆದು, ಬಂಧಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ, ಬಿಜೆಪಿಯಿಂದ ಏನನ್ನು ನಿರೀಕ್ಷಿಸಲಾಗುತ್ತಿತ್ತೋ, ಅದು ಕೊನೆಗೂ ಆಯಿತು. ‘ಮಹಾತ್ಮಗಾಂಧಿ’ಯವರ ಪ್ರಜಾಪ್ರಭುತ್ವ ರಾಷ್ಟ್ರವಾದಲ್ಲಿ ಅನ್ನದಾತನನ್ನು ಭೇಟಿ ಮಾಡಲು ಸಾಕಷ್ಟು ಹೋರಾಟ ಮಾಡಿದ ನಮ್ಮ ನಾಯಕಿ ಪ್ರಿಯಂಕಗಾಂಧಿ ಜೀಯವರನ್ನು ‘ಗೋಡ್ಸೆ’ಯ ಆರಾಧಕರು ಹರ್ಗಾಂವ್ ನಲ್ಲಿ ಬಂಧನಕ್ಕೊಳಪಡಿಸಿದ್ದಾರೆ. ಇದು ಹೋರಾಟದ ಆರಂಭವಷ್ಟೇ. ಕಿಸಾನ್ ಏಕತಾ ಜಿಂದಾಬಾದ್ ಎಂದು ಬರೆದುಕೊಂಡಿದ್ದಾರೆ.
ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನಕಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. 3ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಉತ್ತರಪ್ರದೇಶದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.