ಅಯೋಧ್ಯೆ: ರಾಮಜನ್ಮಭೂಮಿಯಲ್ಲಿ ಪ್ರಾಣ ಪ್ರತಿಷ್ಠಾಕ್ಕೆ ಸಂಬಂಧಿಸಿದ ಪೂಜಾ ವಿಧಿ-ವಿಧಾನಗಳು ಮಂಗಳವಾರದಿಂದಲೇ ಪ್ರಾರಂಭವಾಗಲಿವೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.
ಮಂಗಳವಾರದಿಂದ ಆರಂಭವಾಗಿ ಜನವರಿ 21ರವರೆಗೆ ಈ ಪೂಜಾ ಕಾರ್ಯಕ್ರಮಗಳು ಮುಂದುವರಿಯಲಿದೆ. ಇನ್ನು ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಆರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳಲಿದೆ ಎಂದರು.
ಸಂಪ್ರದಾಯದಂತೆ 1000 ಬುಟ್ಟಿಗಳಲ್ಲಿ ಉಡುಗೊರೆಗಳು ನೇಪಾಳದ ಜನಕ್ಪುರ ಮತ್ತು ಮಿಥಿಲಾ ಪ್ರದೇಶಗಳಿಂದ ಬಂದಿದೆ. ರಾಜಕಾರಣಿಗಳು, ಅಧಿಕಾರಿಗಳು, ಜಡ್ಜ್ಗಳು, ವಿಜ್ಞಾನಿಗಳು, ಆಟಗಾರರು, ಸಂಗೀತಗಾರರು, ಸಂತರು, ಪ್ರಾಣ ತ್ಯಾಗ ಮಾಡಿದ ಸೈನಿಕರ ಕುಟುಂಬಸ್ಥರು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಮಲಲ್ಲಾ ಪ್ರಣಪ್ರತಿಷ್ಠಾ ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಸುಮಾರು 65 ರಿಂದ 75 ನಿಮಿಷಗಳವರೆಗೆ ಇರುತ್ತದೆ ಎಂದು ಚಂಪತ್ ರೈ ಹೇಳಿದರು.