ಚಮೋಲಿ: ಉತ್ತರಾಖಂಡದ ಚಮೋಲಿಯ ಅಲಕನಂದಾ ನದಿಯ ದಡದಲ್ಲಿ ನಮಾಮಿ ಗಂಗೆ ಯೋಜನೆಯ ಸ್ಥಳದಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ರಿಷಿಕೇಶದಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಚಮೋಲಿ ಪೊಲೀಸ್ ಅಧೀಕ್ಷಕ ಪ್ರಮೇಂದ್ರ ದೋಭಾಲ್ ಮಾತನಾಡಿದ್ದು “ಸೆಕ್ಯೂರಿಟಿ ಗಾರ್ಡ್ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ ಎಂದು ನಮಗೆ ಕರೆ ಬಂದಿತು. ಸ್ಥಳ ಪರಿಶೀಲನೆಗಾಗಿ ಪೊಲೀಸರು ಗ್ರಾಮಸ್ಥರೊಂದಿಗೆ ಹೋದಾಗ 21 ಜನರು ವಿದ್ಯುತ್ ಸ್ಪರ್ಶಿಸಿ ತೀವ್ರ ಗಾಯಗೊಂಡಿದ್ದು ತಿಳಿದುಬಂದಿದೆ.
ಆಸ್ಪತ್ರೆಯಲ್ಲಿ 15 ಮಂದಿ ಸಾವನ್ನಪ್ಪಿದ್ದು, ಉಳಿದವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದರು. ರಕ್ಷಣಾ ಕಾರ್ಯಾಚರಣೆಗಳಿಗಾಗಿ ಹೆಲಿಕಾಪ್ಟರ್ ಗಳನ್ನು ಬಳಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ.
ವಿದ್ಯುದಾಘಾತದಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಮೂವರು ಗೃಹ ರಕ್ಷಕರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿ ವಿ ಮುರುಗೇಶನ್ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲಕಾನಂದದ ನೀರಿನ ಮಟ್ಟ ಏರಿಕೆಯಾಗಿದೆ. ಅಲಕಾನಂದದ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೌರಿ ಜಿಲ್ಲೆಯ ಶ್ರೀನಗರದಲ್ಲಿರುವ ಜಿವಿಕೆ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನಿಂದ ಸುಮಾರು 3,000 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.