ಉತ್ತರಾಖಂಡ್: ಉತ್ತರಾಖಂಡ್ನ ಹಲ್ದ್ವಾನಿಯ ಬಂಭುಲ್ಪುರದಲ್ಲಿ ನಿನ್ನೆ ನಡೆದ ಕಲ್ಲು ತೂರಾಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ಬಂಭುಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ರಮ ಮದರಸಾ ಮತ್ತು ನಮಾಜ್ ಮಾಡುವ ಸ್ಥಳವನ್ನು ಕೆಡಗುವ ಸಂದರ್ಭದಲ್ಲಿ ಭಾರೀ ಗಲಾಟೆ ನಡೆದಿತ್ತು. ಅಲ್ಲಿನ ಮಹಾನಗರ ಪಾಲಿಕೆ ಜೆಸಿಬಿಯೊಂದಿಗೆ ಸ್ಥಳಕ್ಕೆ ಆಗಮಿಸಿತ್ತು. ಆಗ ಅಲ್ಲಿದ್ದ ದುಷ್ಕರ್ಮಿಗಳು ಅಧಿಕಾರಿಗಳ, ಪೊಲೀಸರ ಹಾಗೂ ಪತ್ರಕರ್ತರ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಬಂಭುಲ್ಪುರ ಗಲಾಟೆಯಲ್ಲಿ ಭಾಗಿಯಾದ ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆ ನೀಡಲಾಗುತ್ತದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಇಡೀ ನಗರವನ್ನು ಕಂಟೋನ್ಮೆಂಟ್ ಆಗಿ ಪರಿವರ್ತಿಸಲಾಗಿದೆ. ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.
ಹಿಂಸಾಚಾರ ಸಂಬಂಧ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಇತರೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ಉತ್ತರಾಖಂಡ್ ಜನರಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಧಾಮಿ ಮನವಿ ಮಾಡಿಕೊಂಡಿದ್ದಾರೆ.
ಎಸ್ಎಸ್ಪಿ, ಡಿಎಂ ಸೇರಿದಂತೆ ಜಿಲ್ಲೆಯ ಉನ್ನತ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಇಡೀ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಾಗಿದೆ.