ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 23 ರಂದು ವಾರಣಾಸಿಗೆ ಭೇಟಿ ನೀಡಲಿದ್ದು, ಅಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ ಸುಮಾರು 1,115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಅವಾಸಿಯಾ ವಿದ್ಯಾಲಯಗಳನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ಸುಮಾರು 450 ಕೋಟಿ ರೂ.ವೆಚ್ಚದಲ್ಲಿ 30 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಪಡಿಸುತ್ತಿರುವ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕ್ರೀಡಾಂಗಣದ ವಾಸ್ತುಶೈಲಿಯು ಭಗವಾನ್ ಶಿವನಿಂದ ಸ್ಫೂರ್ತಿ ಪಡೆದಿದ್ದು, ಅರ್ಧಚಂದ್ರಾಕಾರದ ಛಾವಣಿ, ತ್ರಿಶೂಲ ಆಕಾರದ ಫ್ಲಡ್-ಲೈಟ್ಗಳನ್ನು ಒಳಗೊಂಡಿದೆ.
ಕ್ರೀಡಾಂಗಣವು 30,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಮಧ್ಯಾಹ್ನ 3.15 ರ ಸುಮಾರಿಗೆ ಪ್ರಧಾನಮಂತ್ರಿಯವರು ರುದ್ರಾಕ್ಷ್ ಅಂತರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರವನ್ನು ತಲುಪುತ್ತಾರೆ. ಬಳಿಕ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಟಲ್ ಅವಾಸಿಯಾ ಶಾಲೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದಾದ್ಯಂತ ಸುಮಾರು 1,115 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 16 ಅಟಲ್ ಅವಾಸಿಯಾ ವಿದ್ಯಾಲಯವನ್ನು ಕಾರ್ಮಿಕರು, ಕಟ್ಟಡ ಕಾರ್ಮಿಕರು ಮತ್ತು ಕೊರೊನಾವೈರಸ್ನಿಂದ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗಾಗಿ ಪ್ರತ್ಯೇಕವಾಗಿ ಪ್ರಾರಂಭಿಸಲಾಗಿದೆ. ಪ್ರತಿ ಶಾಲೆಯು 10-15 ಎಕರೆ ಪ್ರದೇಶದಲ್ಲಿ ತರಗತಿ ಕೊಠಡಿಗಳು, ಕ್ರೀಡಾ ಮೈದಾನ, ಮನರಂಜನಾ ಪ್ರದೇಶ, ಮಿನಿ ಸಭಾಂಗಣ, ಹಾಸ್ಟೆಲ್ ಸಂಕೀರ್ಣ, ಮೆಸ್ ಮತ್ತು ಸಿಬ್ಬಂದಿಗೆ ವಸತಿ ಸಮುಚ್ಚಯಗಳನ್ನು ಒಳಗೊಂಡಿದೆ.