ಇಸ್ಲಾಮಾಬಾದ್: ಭಾರತ ಪಾಕಿಸ್ತಾನ ರಾಜಕೀಯ ಸಂಬಂಧಗಳು ತೀವ್ರವಾಗಿ ಹದಗೆಟ್ಟಿವೆ. ಈ ನಡುವೆ 2008ರ ನವೆಂಬರ್ 26ರಂದು ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಸಂಸ್ಥಾಪಕ ಹಫೀಜ್ ಸಯೀದ್ನನ್ನ ಹಸ್ತಾಂತರಿಸಬೇಕು ಎಂದು ಭಾರತ ಕೇಳಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.
ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರೆ ಮುಮ್ತಾಜ್ ಝಹ್ರಾ ಬಲೂಚ್ ಅವರು, ಹಫೀಜ್ ಸಯೀದ್ ಹಸ್ತಾಂತರಕ್ಕೆ ಭಾರತದ ಮನವಿ ಬಂದಿದೆ. ಆದರೆ, ಹಸ್ತಾಂತರಿಸಲು ಸಾಧ್ಯವಿಲ್ಲ, ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ.
ಮುಮ್ತಾಜ್ ಝಹ್ರಾ ಬಲೂಚ್ ಅವರು ತಮ್ಮ ಹೇಳಿಕೆಯಲ್ಲಿ, ಹಫೀಜ್ ಸಯೀದ್ನನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಸ್ತಾಂತರಿಸುವಂತೆ ಪಾಕಿಸ್ತಾನವು ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.
ಹಫೀಜ್ ಸಯೀದ್ ಬೆಂಬಲಿತ ಪಕ್ಷ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ತಿಳಿದುಬಂದಿದೆ.